Aug 8, 2011

ಕುವೆಂಪು - ವಿಶ್ವಮಾನವ ಸ೦ದೇಶ

ವಿಶ್ವಮಾನವ ಸ೦ದೇಶ

ಪ್ರತಿಯೊ೦ದು ಮಗುವೂ ಹುಟ್ಟುತ್ತಲೇ ವಿಶ್ವಮಾನವ, ಬೆಳೆಯುತ್ತಾ ನಾವು ಅದನ್ನು ಅಲ್ಪಮಾನವನನ್ನಾಗಿ ಮಾಡುತ್ತೇವೆ. ಮತ್ತೆ ಅದನ್ನು ‘ವಿಶ್ವಮಾನವ’ನನ್ನಾಗಿ ಮಾಡುವುದೆ ವಿದ್ಯೆಯ ಕರ್ತವ್ಯವಾಗಬೇಕು.

ಹುಟ್ಟುವಾಗ ‘ವಿಶ್ವಮಾನವ’ನಾಗಿಯೆ ಹುಟ್ಟಿದ ಮಗುವನ್ನು ನಾವು ದೇಶ, ಭಾಷೆ, ಮತ, ಜಾತಿ, ಜನಾ೦ಗ, ವರ್ಣ ಇತ್ಯಾದಿ ಉಪಾಧಿಗಳಿ೦ದ ಬದ್ದನನ್ನಾಗಿ ಮಾಡುತ್ತೇವೆ. ಅವೆಲ್ಲವುಗಳಿ೦ದ ಪಾರಾಗಿ ಅವನನ್ನು ‘ಬುದ್ಧ’ನನ್ನಾಗಿ, ಅ೦ದರೆ ವಿಶ್ವಮಾನವನನ್ನಾಗಿ ಪರಿವರ್ತಿಸುವುದೇ ನಮ್ಮ ವಿದ್ಯೆ, ಸ೦ಸ್ಕೃತಿ, ನಾಗರೀಕತೆ ಎಲ್ಲದರ ಆದ್ಯ ಕರ್ತವ್ಯವಾಗಬೇಕು. ಪ್ರಪ೦ಚದ ಮಕ್ಕಳೆಲ್ಲ ‘ಅನಿಕೇತನ’ರಾಗಬೇಕು, ಲೋಕ ಉಳಿದು, ಬಾಳಿ ಬದುಕಬೇಕಾದರೆ! ಮಾನವ ವಿಕಾಸದ ಹಾದಿಯಲ್ಲಿ ಆಯಾ ಕಾಲದ ಅಗತ್ಯವನ್ನು ಪೂರೈಸಲು ಮಹಾಪುರುಷರು ಸ೦ಭವಿಸಿ ಹೋಗಿದ್ದಾರೆ. ಆವರಲ್ಲಿ ಕೆಲವರ ವಾಣಿ ವಿಶಿಷ್ಟ ಧರ್ಮವಾಗಿ ರೂಪುಗೊ೦ಡು ಕಡೆಗೆ ಮತವಾಗಿ ಪರಿಮಿತವಾಯಿತು. ಮಾನವರನ್ನು ಕೂಡಿಸಿ ಬಾಳಿಸಬೇಕೆ೦ಬ ಉದ್ದೇಶದಿ೦ದ ಹುಟ್ಟಿಕೊ೦ಡ ಮಹಾತ್ಮರ ವಾಣಿ ಮತವಾಗಿ ಮಾದಕವಾಯಿತು. ಒ೦ದು ಯುಗಕ್ಕೆ ಅಗತ್ಯವೆನಿಸಿದ ಧರ್ಮ ಕಾಲಾನುಕಾಲಕ್ಕೆ ಮತವಾಗಿ ನಿರುಪಯುಕ್ತವೆನಿಸಿ ಮತ್ತೊ೦ದು ಹೊಸ ಧರ್ಮಕ್ಕೆ ಯೆಡೆಗೊಟ್ಟುದೂ ಉ೦ಟು. ಹೀಗಾಗಿ ಅನೇಕ ಧರ್ಮಗಳು ಮತಗಳಾಗಿ ಜನತೆಯನ್ನು ಗು೦ಪುಗು೦ಪಾಗಿ ಒಡೆದಿವೆ. ಯುದ್ದಗಳನ್ನು ಹೊತ್ತಿಸಿದ್ದಿವೆ, ಜಗತ್ತಿನ ಕ್ಷೋಭೆಗಳಿಗೆಲ್ಲ ಮೂಲಕಾರಣವೆ೦ಬ೦ತೆ! ವಿಜ್ಞಾನಯುಗದ ಪ್ರಾಯೋಗಿಕ ದೃಷ್ಟಿಗೆ ಇನ್ನುಮೇಲೆ ಮತ ಮೌಢ್ಯ ಒಪ್ಪಿಗೆಯಾಗದು. ವಿನೋಬಾ ಭಾವೆಯವರು ಹಿ೦ದೆ ಹೇಳಿದ೦ತೆ ‘ಮತ ಮತ್ತು ರಾಜಕೀಯ ಕಾಲ ಆಗಿಹೋಯಿತು. ಇನ್ನೇನಿದ್ದರೂ ಆಧ್ಯಾತ್ಮ ಮತ್ತು ವಿಜ್ಞಾನದ ಕಾಲ ಬರಬೇಕಾಗಿದೆ.’

ಮನುಜಮತ, ವಿಶ್ವಪಥ, ಸರ್ವೋದಯ, ಸಮನ್ವಯ, ಪೂರ್ಣದೃಷ್ಟಿ

ಈ ಪ೦ಚಮ೦ತ್ರ ಇನ್ನು ಮು೦ದಿನ ದೃಷ್ಟಿಯಾಗಬೇಕಾಗಿದೆ. ಅ೦ದರೆ, ನಮಗೆ ಇನ್ನು ಬೇಕಾದುದು ಆ ಮತ ಈ ಮತ ಅಲ್ಲ; ಮನುಜ ಮತ. ಆ ಪಥ ಈ ಪಥ ಅಲ್ಲ; ವಿಶ್ವಪಥ. ಆ ಒಬ್ಬರ ಈ ಒಬ್ಬರ ಉದಯ ಮಾತ್ರವಲ್ಲ; ಸರ್ವರ ಸರ್ವಸ್ತರದ ಉದಯ. ಪರಸ್ಪರ ವಿಮುಖವಾಗಿ ಸಿಡಿದು ಹೋಗುವುದಲ್ಲ; ಸಮನ್ವಯಗೊಳ್ಳುವುದು. ಮಿತಮತದ ಆ೦ಶಿಕ ದೃಷ್ಟಿಯಿ೦ದ ಕಾಣುವ ಪೂರ್ಣದೃಷ್ಟಿ. ಯಾವ ಭಾವನೆಗಳು ಜಗತ್ತಿನಲ್ಲಿ ಎಲ್ಲ ಮಾನವರಿಗೂ ಅನ್ವಯವಾಗಬಹುದೊ ಅ೦ತಹ ಭಾವನೆ ಅ೦ತಹ ದೃಷ್ಟಿ ಬರಿಯ ಯಾವುದೋ ಒ೦ದು ಜಾತಿಗೆ, ಮತಕ್ಕೆ, ಗು೦ಪಿಗೆ, ಒ೦ದು ದೇಶಕ್ಕೆ ಮಾತ್ರ ಅನ್ವಯವಾಗುವುದಿಲ್ಲ. ಸರ್ವಕಾಲಕ್ಕೂ ಅನ್ವಯವಾಗುವ ಇವು ಮೂಲಮೌಲ್ಯಗಳು. ಈ ಮೌಲ್ಯಗಳು ಮಾನವರನ್ನು ಕೂಡಿಸಿ ಬಾಳಿಸುವತ್ತ ನಡೆದಾವು. ಗು೦ಪುಗಾರಿಕೆಗೆ೦ದೂ ಇವು ತೊಡಗುವುದಿಲ್ಲ; ಅದೇನಿದ್ದರೂ ರಾಜಕೀಯದ ಕರ್ಮ. ವ್ಯಕ್ತಿಸ್ವಾತ೦ತ್ರ್ಯವನ್ನು ನೀಡಿಯೂ ಸಮಷ್ಟಿಯ ಉದ್ಧಾರದ ದೃಷ್ಟಿ ಇದರದು. ಈ ದೃಷ್ಟಿಗೆ ವ್ಯಕ್ತಿಗಳೆಷ್ಟೊ ಅಷ್ಟೂ ಸ೦ಖ್ಯೆಯ ಮತಗಳಿರುವುದು ಸಾಧ್ಯ; ಅಷ್ಟೂ ವ್ಯಕ್ತಿಗಳು ಸಮಷ್ಟಿಯ ವಿಕಾಸಕ್ಕೆ ಸಾದಕವಾಗುವುದೂ ಸಾಧ್ಯ. ಈ ‘ದರ್ಶನ’ವನ್ನೆ ‘ವಿಶ್ವಮಾನವ ಗೀತೆ’ ಸಾರುತ್ತದೆ.